ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಭಾನುವಾರ ರಾತ್ರಿ ಅವರು ಸ್ವತಃ ಟ್ವೀಟ್ ಮೂಲಕ ಈ ವಿಷಯ ತಿಳಿಸಿದ್ದು, ಕೆಲವು ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರೂ ಮುನ್ನೆಚ್ಚರಿಕೆ ವಹಿಸಿ, ಸ್ವತಃ ಕ್ವಾರಂಟೈನ್ ಆಗುವಂತೆ ಮನವಿ ಮಾಡಿಕೊಂಡಿದ್ದಾರೆ. ರೋಗದ ಲಕ್ಷಣಗಳಿಲ್ಲವಾದರೂ, ಮುನ್ನೆಚ್ಚರಿಕೆಗಾಗಿ ಅವರು ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟ್ವೀಟ್ನಲ್ಲಿ ಅವರು, “ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.” ಎಂದಿದ್ದಾರೆ.
ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಈ ವಯಸ್ಸಿನಲ್ಲೂ ಯಡಿಯೂರಪ್ಪ ಅವರ ಶ್ರಮವು ಸಾಕಷ್ಟು ಶ್ಲಾಘನೆಗೆ ಪಾತ್ರವಾಗಿತ್ತು. ಕೇಂದ್ರ ಸಚಿವ ಅಮಿತ್ ಶಾ ಅವರಿಗೂ ಭಾನುವಾರವೇ ಸೋಂಕು ದೃಢಪಟ್ಟಿತ್ತು. ದೇಶದ ವಿವಿಧೆಡೆ ಜನ ಸೇವಕರಿಗೂ ಕೊರೊನಾ ಸೋಂಕು ತಗುಲಿದ ಸಾಕಷ್ಟು ಪ್ರಕರಣಗಳು ವರದಿಯಾಗಿವೆ.

Average Rating